402 ಲೆಕ್ಕ ಪರಿಶೋಧಕರ ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಕೆ

ಸಾಂದರ್ಭಿಕ ಚಿತ್ರ

BENGALURU FEB 15

ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯಲ್ಲಿ ಖಾಲಿ ಇರುವ 402 ಲೆಕ್ಕ ಪರಿಶೋಧಕರ ಹುದ್ದೆಗಳ ನೇಮಕಾತಿಗಾಗಿ ಪ್ರಸಾವನೆ ಸಲ್ಲಿಸಲಾಗಿದೆ. ಕೋವಿಡ್‌ ನಿಂದಾಗಿ ಕಳೆದ ಎರಡು ವರ್ಷದಿಂದ ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಿರಲಿಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್‌ ಹೇಳಿದರು.

ಸಹಕಾರಿ ಲೆಕ್ಕಪರಿಶೋಧನಾ ಇಲಾಖೆಯನ್ನು ಬಲಪಡಿಸಲು ಇಲಾಖೆ ಕೈಗೊಂಡಿರುವ ಕ್ರಮಗಳೇನು ಎಂದು ವಿಧಾನಪರಿಷತ್‌ ಸದಸ್ಯರಾದ ಭಾರತಿಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಲೆಕ್ಕ ಪರಿಶೋಧನೆ ವರದಿ ಆಧಾರದ ಮೇಲೆ ಸಂಘ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತವೆ. ಖಾಲಿ ಇರುವ 402 ಲೆಕ್ಕ ಪರಿಶೋಧಕರ ಹುದ್ದೆಗಳ ನೇಮಕ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದರು.

ಶ್ರೀಗುರು ರಾಘವೇಂದ್ರ ಸಹಕಾರ ಬ್ಯಾಂಕ್‌

ಶ್ರೀಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ನಿಂದ ಠೇವಣಿದಾರರಿಗೆ ವಂಚನೆಯಾಗಿರುವ ಬಗ್ಗೆ ಕೈಗೊಂಡಿರುವ ಕ್ರಮಗಳೇನು ಎಂದು ವಿಧಾನಪರಿಷತ್‌ ಸದಸ್ಯರಾದ ಯು.ಬಿ.ವೆಂಕಟೇಶ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಭಾರತೀಯ ರಿಸರ್ವ್‌ ಬ್ಯಾಂಕ್‌ ಸಲಹೆ ಮೇರೆಗೆ ಹಾಗೂ ಹೈಕೋರ್ಟ್‌ ನಿರ್ದೇಶನದ ಪ್ರಕಾರ ಬ್ಯಾಂಕಿನ ಆಡಳಿತ ಮಂಡಳಿಯನ್ನು ರದ್ದುಗೊಳಿಸಿ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

24 ನಿರ್ದೇಶಕರು ಮತ್ತು ಅಧ್ಯಕ್ಷರ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. 2014-15 ರಿಂದ 2018-19ರವರೆಗಿನ ಲೆಕ್ಕಪತ್ರಗಳನ್ನು ಮರುಲೆಕ್ಕಪರಿಶೋಧನೆಗೆ ಆದೇಶಿಸಲಾಗಿದೆ. ‌ಪ್ರಕರಣದ ಕುರಿತು ಸಿಐಡಿ ತನಿಖೆ ಕೂಡ ನಡೆಯುತ್ತಿದೆ. ಬ್ಯಾಂಕ್‌ ಪುನಶ್ಚೇತನಗೊಳಿಸುವ ಕುರಿತು ಸಹಕಾರ ಇಲಾಖೆ, ಆರ್‌ ಬಿಐ ಅಧಿಕಾರಿಗಳು ಪ್ರತಿ 15 ದಿನಕ್ಕೊಮ್ಮೆ ಸಭೆ ನಡೆಸಿ ಪರಾಮರ್ಶಿಸುತ್ತಿದ್ದಾರೆ. ಸಾಲ ವಸೂಲಾತಿಗೆ ಕ್ರಮವಹಿಸಲಾಗುತ್ತಿದೆ. ಆರೋಪಿಗಳ ಫೋಟೋವನ್ನು ದಿನಪತ್ರಿಕೆಗಳಲ್ಲಿ ಪ್ರಕಟಿಸುವಂತೆ ಸೂಚಿಸಲಾಗಿದೆ. ಠೇವಣಿ ಹಿಂಪಾವತಿ, ಬ್ಯಾಂಕ್‌ ಪುನಶ್ಚೇತನ ಕುರಿತಂತೆ ಫೆಬ್ರವರಿ ಅಂತ್ಯದ ವೇಳೆಗೆ ಠೇವಣಿದಾರರಿಗೆ ವರ್ಚ್ಯುವಲ್‌ ಮೂಲಕ ಮಾಹಿತಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಎಪಿಎಂಸಿ

ರಾಜ್ಯದಲ್ಲಿ ಯಾವುದೇ ಎಪಿಎಂಸಿಗಳು ನಷ್ಟದಲ್ಲಿಲ್ಲ ಹಾಗೂ ಎರಡೆರಡು ಎಪಿಎಂಸಿಗಳನ್ನು ವಿಲೀನಗೊಳಿಸುವ ಪ್ರಸ್ತಾವನೆ ಪ್ರಸ್ತುತ ಸರ್ಕಾರದ ಮುಂದೆ ಇಲ್ಲ ಎಂದು ವಿಧಾಪರಿಷತ್‌ ಸದಸ್ಯ ಕೆ.ಹರೀಶ್‌ ಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸಿದರು. 1.50 ರೂ. ಸೆಸ್‌ ಇದ್ದಾಗ ವರ್ಷಕ್ಕೆ 625 ಕೋಟಿ ರೂ. ಹಣ ಸಂಗ್ರವಾಗುತ್ತಿತ್ತು. ಈಗ 130 ರಿಂದ 170 ಕೋಟಿ ರೂ. ಸಂಗ್ರಹವಾಗುತ್ತಿದೆ. ಸೆಸ್‌ ಕಡಿಮೆ ಮಾಡಿದ ಕಾರಣಕ್ಕೆ ಎಪಿಎಂಸಿಗಳು ನಷ್ಟದಲ್ಲಿ ಇಲ್ಲ ಎಂದರು.

LEAVE A REPLY

Please enter your comment!
Please enter your name here