MYSURU DASARA:ಮೈಸೂರು ವಿಶ್ವ ವಿಖ್ಯಾತ ಜಂಬೂಸವಾರಿಗೆ ಸಕಲ ಸಿದ್ಧತೆ

MYSURU OCT 4

ಎರಡು ವರ್ಷ ಸರಳ ದಸರಾ ಆಚರಣೆ ಮಾಡಲಾಗಿದ್ದು ಈ ಬಾರಿ ಅದ್ದೂರಿಯಾಗಿ ದಸರಾ ಆಯೋಜಿಸಲಾಗುತ್ತಿದೆ. ಜಂಬೂಸವಾರಿಗೆ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ‌.ಸೋಮಶೇಖರ್ ಅವರು ಹೇಳಿದರು.

ಮಾವುತ ಮತ್ತು ಕಾವಾಡಿಗರು ಮತ್ತವರ ಕುಟುಂಬದವರಿಗೆ ಅರಮನೆ ಆವರಣದಲ್ಲಿ ಉಪಹಾರ ಬಡಿಸಿ ಯೋಗಕ್ಷೇಮ ವಿಚಾರಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಂಬೂಸವಾರಿ ಸಾಗುವ ರಸ್ತೆಯಲ್ಲಿ ಸಾರ್ವಜನಿಕರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಆನೆಗಳಿಗೆ ಒಂದು ತಿಂಗಳಿಂದ ತರಬೇತಿ ನೀಡಲಾಗಿದೆ. ನಾಳೆ ಸಂಜೆ ಜಂಬೂಸವಾರಿ ಸಾಗಲಿದೆ, ಇದರ ಜೊತೆಗೆ 40 ಸ್ತಬ್ಧಚಿತ್ರಗಳು, ಕಲಾತಂಡಗಳು ಮೆರವಣಿಗೆಯಲ್ಲಿ ಸಾಗಲಿವೆ ಎಂದು ಹೇಳಿದರು.

ಬಂದೋಬಸ್ತ್ ಗಾಗಿ ಸುಮಾರು 4 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ರೀತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಹೈಕೋರ್ಟ್ ನ್ಯಾಯಾಧೀಶರು ಸೇರಿದಂತೆ ಗಣ್ಯಾತಿಗಣ್ಯರು ಆಗಮಿಸಲಿದ್ದಾರೆ ಎಂದು ಹೇಳಿದರು.

ಪಾಸ್ ವಿತರಣೆ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಎಷ್ಟು ಸ್ಥಳಾವಕಾಶ ಇದೆಯೋ ಅಷ್ಟು ವ್ಯವಸ್ಥೆ ಮಾಡಲಾಗಿದೆ. ದಸರಾ ಎಂದರೆ ಕೇವಲ ಪಾಸ್ ಅಲ್ಲ. ಒಂದು ವಾರಗಳ ನಡೆದ ಯುವ ದಸರಾ, ಯುವ ಸಂಭ್ರಮ, ರೈತ ದಸರಾ, ಕುಸ್ತಿ ಇದ್ಯಾವುದಕ್ಕೂ ಪಾಸ್ ಇರಲಿಲ್ಲ. 15-20 ಲಕ್ಷ ಜನ ಸೇರುವ ನಿರೀಕ್ಷೆಯಿದೆ ಎಂದು ಹೇಳಿದರು.

ದಸರಾ ಉಪಸಮಿತಿ ವ್ಯವಸ್ಥಿತವಾಗಿ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ಅಪ್ಪು ನಮನ, ಯುವ ದಸರಾ, ರೈತ ದಸರಾ, ಕವಿಗೋಷ್ಠಿ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿದವು. ಮಹಾರಾಣಿ ಅವರು ಕೂಡ ಎಲ್ಲಾ ರೀತಿಯ ಸಹಕಾರ ನೀಡಿದರು. ಅಧಿಕಾರಿಗಳು, ಮೈಸೂರು ಜನತೆಯ ಸಂಪೂರ್ಣ ಸಹಕಾರದಿಂದ ಎಲ್ಲವೂ ಸುಸೂತ್ರವಾಗಿ ಸಾಗಿದೆ ಎಂದು ಹೇಳಿದರು.

1 COMMENT

LEAVE A REPLY

Please enter your comment!
Please enter your name here